breaking news

ವಿಪತ್ತು ನಿರ್ವಹಣೆ ವಿಫಲವಾದರೆ ತಾಲೂಕು ಅಧಿಕಾರಿಗಳೇ ಹೊಣೆ: ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಎಚ್ಚರಿಕೆ

ವಿಪತ್ತು ನಿರ್ವಹಣೆ ವಿಫಲವಾದರೆ ತಾಲೂಕು ಅಧಿಕಾರಿಗಳೇ ಹೊಣೆ: ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಎಚ್ಚರಿಕೆ

ತುಮಕೂರು (ಕ.ವಾ.) ಜು.23: ಜಿಲ್ಲೆಯಲ್ಲಿ ವಿಪತ್ತು ಪರಿಸ್ಥಿತಿಯನ್ನು ಸಮರ್ಪಕವಾಗಿ ನಿರ್ವಹಿಸದಿದ್ದಲ್ಲಿ ಆಯಾ ತಾಲೂಕು ಮಟ್ಟದ ಅಧಿಕಾರಿಗಳನ್ನೇ ನೇರವಾಗಿ ಹೊಣೆ ಮಾಡಲಾಗುವುದು ಎಂದು ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷರು ಹಾಗೂ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಸೂಚನೆ ನೀಡಿದರು.

ಜಿಲ್ಲಾಧಿಕಾರಿಗಳ ಕಚೇರಿಯ ಕೆಸ್ವಾನ್ ಸಭಾಂಗಣದಲ್ಲಿ ಗುರುವಾರ ಜಿಲ್ಲೆಯಲ್ಲಿ ಬರ ಪರಿಸ್ಥಿತಿ, ಮುಂಗಾರು ಹಂಗಾಮು, ಕೋವಿಡ್ ಮುನ್ನೆಚ್ಚರಿಕೆ, ತಾಲೂಕು ಮಟ್ಟದ ಟಾಸ್ಕ್ ಫೋರ್ಸ್ ಕಾರ್ಯಚಟುವಟಿಕೆ ಹಾಗೂ ಕುಡಿಯುವ ನೀರಿನ ನಿರ್ವಹಣೆ ಕುರಿತು ವಿಡಿಯೋ ಕಾನ್ಫರೆನ್ಸ್ ಮೂಲಕ ಜಿಲ್ಲಾ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳೊಂದಿಗೆ ಪರಿಶೀಲನಾ ಸಭೆ ನಡೆಸಿ ಅವರು ಮಾತನಾಡಿದರು.

ಪ್ರಸಕ್ತ ಮುಂಗಾರು ಮಳೆ ಹಾಗೂ ಋತುಮಾನ ಪರಿಸ್ಥಿತಿ, ಬಿತ್ತನೆ ಪ್ರಗತಿ, ಬಿತ್ತನೆ ಬೀಜ ಹಾಗೂ ರಸಗೊಬ್ಬರಗಳ ಲಭ್ಯತೆ ಕುರಿತು ಸಮಗ್ರವಾಗಿ ಪರಿಶೀಲಿಸಿದ ಅವರು, ರೈತರಿಗೆ ಅಗತ್ಯ ಕೃಷಿ ಪರಿಕರಗಳು ಸಕಾಲದಲ್ಲಿ ಲಭ್ಯವಾಗುವಂತೆ ಕ್ರಮ ವಹಿಸಬೇಕೆಂದು ಸೂಚಿಸಿದರು.

ನೆರೆಯ ಆಂಧ್ರಪ್ರದೇಶದಲ್ಲಿ ಕೋವಿಡ್ ಸೋಂಕಿನಿಂದ ಸಾವು ಸಂಭವಿಸಿರುವ ಹಿನ್ನೆಲೆಯಲ್ಲಿ, ಗಡಿಭಾಗದ ಪಾವಗಡ ತಾಲೂಕಿನಲ್ಲಿ ಕೋವಿಡ್ ಸೋಂಕು ನಿಯಂತ್ರಣ ಮತ್ತು ಮುನ್ನೆಚ್ಚರಿಕಾ ಕ್ರಮಗಳ ಕುರಿತು ಸಭೆಯಲ್ಲಿ ಸುದೀರ್ಘವಾಗಿ ಚರ್ಚಿಸಲಾಯಿತು. ಅಗತ್ಯ ಔಷಧಿ, ಆರೋಗ್ಯ ಸೌಲಭ್ಯಗಳು ಹಾಗೂ ನಿಗಾ ಕ್ರಮಗಳನ್ನು ಕೈಗೊಂಡು ಕೋವಿಡ್ ಮುನ್ನೆಚ್ಚರಿಕೆ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವಂತೆ ಆರೋಗ್ಯ ಇಲಾಖೆಯ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಜಿಲ್ಲೆಯ ಗ್ರಾಮೀಣ ಮತ್ತು ನಗರ ಪ್ರದೇಶಗಳಲ್ಲಿ ಕುಡಿಯುವ ನೀರು ಸರಬರಾಜು ವ್ಯವಸ್ಥೆಯನ್ನು ನಿರಂತರವಾಗಿ ಮೇಲ್ವಿಚಾರಣೆ ಮಾಡಬೇಕು. ಯಾವುದೇ ಪ್ರದೇಶದಲ್ಲಿ ಕುಡಿಯುವ ನೀರಿನ ಸಮಸ್ಯೆ ಉಂಟಾಗದಂತೆ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು.

ಜಾನುವಾರುಗಳಿಗೆ ಮೇವಿನ ಲಭ್ಯತೆ ಹಾಗೂ ಮಿನಿ ಕಿಟ್‌ಗಳ ವಿತರಣೆಯ ಪ್ರಗತಿ ಕುರಿತು ಪರಿಶೀಲನೆ ನಡೆಸಿ, ಅಗತ್ಯವಿರುವ ಪ್ರದೇಶಗಳಲ್ಲಿ ಸಮರ್ಪಕ ಮೇವು ಪೂರೈಕೆಗೆ ಕ್ರಮ ವಹಿಸುವಂತೆ ನಿರ್ದೇಶನ ನೀಡಿದರು.

ಜಿಲ್ಲಾ ಹಾಗೂ ತಾಲೂಕು ಮಟ್ಟದ ಎಲ್ಲಾ ಅಧಿಕಾರಿಗಳು ಸಮನ್ವಯದಿಂದ ಕಾರ್ಯನಿರ್ವಹಿಸಿ, ಮುಂಗಾರು ಹಂಗಾಮು, ಬರ ಪರಿಸ್ಥಿತಿ ನಿರ್ವಹಣೆ, ಕೋವಿಡ್ ಮುನ್ನೆಚ್ಚರಿಕೆ ಹಾಗೂ ಕುಡಿಯುವ ನೀರಿನ ಪೂರೈಕೆಗೆ ಸಂಬಂಧಿಸಿದಂತೆ ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ನಿರ್ದೇಶನ ನೀಡಿದರು.

ತಾಲೂಕು ಮಟ್ಟದ ಟಾಸ್ಕ್ ಫೋರ್ಸ್ ಸಮಿತಿಯಲ್ಲಿ ಕುಡಿಯುವ ನೀರಿಗೆ ಸಂಬಂಧಪಟ್ಟ ಕಾಮಗಾರಿಗಳನ್ನು ಅನುಮೋದಿಸಿ ಅನುಷ್ಠಾನಗೊಳಿಸುವುದು ತಾಲೂಕು ತಹಶೀಲ್ದಾರ್ ಮತ್ತು ಕಾರ್ಯನಿರ್ವಾಹಕ ಅಧಿಕಾರಿಗಳ ಜವಾಬ್ದಾರಿಯಾಗಿದ್ದು, ಅನುಮೋದಿಸಿದ ಕಾಮಗಾರಿ ನಡೆಯುತ್ತಿರುವ ಸ್ಥಳಕ್ಕೆ ಖುದ್ದಾಗಿ ಭೇಟಿ ನೀಡಿ ಪರಿಶೀಲಿಸಬೇಕೆಂದು ಎಚ್ಚರಿಸಿದರು.

ಅಪರ ಜಿಲ್ಲಾಧಿಕಾರಿ ಡಾ. ಎನ್. ತಿಪ್ಪೇಸ್ವಾಮಿ ಮಾತನಾಡಿ, ತಾಲೂಕು ಮಟ್ಟದ ಟಾಸ್ಕ್ ಫೋರ್ಸ್ ಸಮಿತಿ ಸಭೆಯಲ್ಲಿ ಕೇವಲ ನಡಾವಳಿಯನ್ನು ತಯಾರಿಸುವುದಷ್ಟೇ ಸಾಲದು. ಸಭೆಯಲ್ಲಿ ಕೈಗೊಂಡ ನಿರ್ಣಯಗಳಂತೆ ಎಲ್ಲಾ ಕಾಮಗಾರಿಗಳನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸಿ, ಸ್ಥಳ ಪರಿಶೀಲನೆ ನಡೆಸುವುದು ಸಂಬಂಧಪಟ್ಟ ತಾಲೂಕಿನ ತಹಶೀಲ್ದಾರ್ ಹಾಗೂ ಕಾರ್ಯನಿರ್ವಾಹಕ ಅಧಿಕಾರಿಗಳ ಜವಾಬ್ದಾರಿಯಾಗಿದೆ ಎಂದು ತಿಳಿಸಿದರು.

ಸಭೆಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ವಿ. ಅಶೋಕ್, ಉಪವಿಭಾಗಾಧಿಕಾರಿ ನಾಹಿದಾ ಜಮ್ ಜಮ್, ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಯೋಗಾನಂದ, ಜಿಲ್ಲಾ ಪಂಚಾಯತ್ ಮುಖ್ಯ ಯೋಜನಾಧಿಕಾರಿ ಸಣ್ಣಮಸಿಯಪ್ಪ, ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

Taluk Officials Will Be Held Responsible If Disaster Management Fails: DC Shubha Kalyan Warns

Share this post

About the author

Leave a Reply

Your email address will not be published. Required fields are marked *